*ಚಿಕ್ಕಮಗಳೂರು;* *ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ* *ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ*
*ಚಿಕ್ಕಮಗಳೂರು;*
*ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ*
*ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ*
ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಯಾದ ಗಣೇಶ್ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು.
ಘಟನೆ ಬಳಿಕ ಸಖರಾಯಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ. ಗಲಾಟೆಯಲ್ಲಿ ಶಾಮೀಲಾದ ಇಬ್ಬರು ಈಗಾಗಲೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಘಟನೆಯ ನಂತರ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಶಾಸಕ ಆನಂದ್, ‘ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದಿದೆ. ನಂತರ ಗಣೇಶ್ ಅವರನ್ನು ಕರೆಸಿ ಕೊಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ 8 ಜನರು ಶಾಮೀಲಾಗಿರುವ ಶಂಕೆ ಇದೆ. ಕೆಲವು ದಿನಗಳಿಂದಲೇ ಎರಡು ಗುಂಪುಗಳ ನಡುವೆ ಉದ್ವಿಗ್ನತೆ ಇತ್ತು. ಪೊಲೀಸರು ಸಮಯಕ್ಕೆ ಕ್ರಮ ಕೈಗೊಂಡಿದ್ದರೆ ಈ ಘಟನೆ ತಪ್ಪಿಸಬಹುದಿತ್ತು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


