*ಯೋಗೇಶ್ ಗೌಡ ಕೊಲೆ ಕೇಸ್;* *ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ* *ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ…*

*ಯೋಗೇಶ್ ಗೌಡ ಕೊಲೆ ಕೇಸ್;*

*ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ*

*ಪ್ರಕರಣದ ಸಂಪೂರ್ಣ ವಿವರ ಇಲ್ಲಿದೆ…*

ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ. ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ. ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ನೀಡಿದೆ. ಇನ್ನು 19ನೇ ಆರೋಪಿ ಚನ್ನಕೇಶವ ಟಿಂಗರಿಕರ್​​ಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದೆ ಹಾಗೂ ಇನ್ನು ಎ 1 ಬಸವರಾಜ ಮುತ್ತಗಿ ಮಾಫಿ ಸಾಕ್ಷಿ ಸ್ಥಾನ ಕೋರ್ಟ್ ಖಚಿತಪಡಿಸಿದೆ. ಇದರ ಜತೆಗೆ ಯೋಗೀಶ್ ಗೌಡರ್ ಮಕ್ಕಳಿಗೆ 16 ಲಕ್ಷ ರೂ ಹಣವನ್ನು ಪರಿಹಾರವಾಗಿ ನೀಡಲು ಸೂಚನೆ ನೀಡಿದೆ.

ಇದೊಂದು ಕರ್ನಾಟಕ ರಾಜಕಾರಣದಲ್ಲಿ ಭಾರೀ ದೊಡ್ಡ ಸಂಚಲವನ್ನು ಮೂಡಿಸಿದೆ. ಇದೀಗ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಕೇಂದ್ರ ಸರ್ಕಾರ ತಂದಿರುವ ಪ್ರಜಾ ಪ್ರತಿನಿಧಿ ಕಾಯ್ದೆಯಡಿಯಲ್ಲಿ ಅವರು ಶಾಸಕ ಸ್ಥಾನದಿಂದ ವಜಾ ಕೂಡ ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಅವರನ್ನ ಬಿಡುಗಡೆಗೆ ಕೋರ್ಟ್ ಆದೇಶಿಸಿತ್ತು.

ಇನ್ನು ಉಳಿದಂತೆ ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ 4 ಸಂದೀಪ್, ಎ5 ವಿನಾಯಕ್, ಎ6 ಮಹಾಬಲೇಶ್ವರ್ ಅಲಿಯಾಸ್ ಮುದಕ, ಎ 7 ಸಂತೋಷ್, ಎ 8 ದಿನೇಶ್, ಎ 9 ಅಶ್ವಥ್, ಎ10 ಸುನಿಲ್, ಎ 11 ನಜೀರ್ ಅಹಮದ್, ಎ 12 ಷಾನವಾಜ್, ಎ 13 ನೂತನ್ , ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ 16 ಚಂದ್ರು ಮಾಮ, ಎ18 ವಿಕಾಸ್ ಕಲಬುರ್ಗಿ, ಎ 19 ಚನ್ನಕೇಶವ ಟಿಂಗರಿಕರ್​​ ಅವರನ್ನು ದೋಷಿಗಳು ಎಂದು ಹೇಳಿ, ಶಿಕ್ಷೆಯನ್ನು ನೀಡಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್​ಷೆಯನ್ನು ಘೋಷಣೆ ಮಾಡಿದೆ. ಇದೀಗ ಅವರು 3 ದಿನದಿಂದ ಒಂದೇ ಬಟ್ಟೆಯಲ್ಲಿದ್ದಾರೆ, ಬಟ್ಟೆ ಬದಲಿಸಲು ಅನುಮತಿ ನೀಡುವಂತೆ ಶಾಸಕ ವಿನಯ್ ಕುಲಕರ್ಣಿ ಪರ ವಕೀಲ ಸುನಿಲ್ ಮನವಿ ಮಾಡಿದ್ದಾರೆ. ಅಪರಾಧಿಗಳಿಗೆ ಬಟ್ಟೆ ಒದಗಿಸಲು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೈಲು ಕೈಪಿಡಿಯಲ್ಲಿರುವಂತೆ ಬಟ್ಟೆ ಒದಗಿಸಲು ಜಡ್ಜ್‌ ಸೂಚನೆ ನೀಡಿದ್ದಾರೆ. ಇದರ ಜತೆಗೆ ಪ್ರತಿ ಸೆಕ್ಷನ್‌ಗೂ ಪ್ರತ್ಯೇಕವಾಗಿ ದಂಡ ವಿಧಿಸಲಾಗಿದೆ.

ಇನ್ನು ಪ್ರಕರಣದ ಹಿನ್ನಲೆಗಳೇನು?
2016ರ ಜೂನ್ 15ರಂದು ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು ಸಪ್ತಾಪುರ ಬಡಾವಣೆಯ ಜಿಮ್​​ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದ ಉಪನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸಿದ್ದರು. ಈ ಕೊಲೆ ಆಸ್ತಿ ವಿವಾದದ ವಿಚಾರಕ್ಕಾಗಿ ನಡೆದಿದೆ ಎಂದು ಹೇಳಲಾಗಿದೆ.ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದ್ರೆ, ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂದು ಹೇಳಿತ್ತು. ಅಲ್ಲಿಂದ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು. ಈ ಕೊಲೆಯಲ್ಲಿ ಶಾಸಕ ವಿನಯ್‌ ಕುಲಕರ್ಣಿ ಕೈವಾಡವಿರುವ ಅನುಮಾನ ವ್ಯಕ್ತವಾಗಿತ್ತು. 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು, ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇದರ ನಂತರ ವಿನಯ್‌ ಕುಲಕರ್ಣಿ ಜಾಮೀನು ಪಡೆದು ಹೊರಗೆ ಬಂದಿದ್ದರು. ನಂತರದಲ್ಲಿ ಈ ಪ್ರಕರಣವನ್ನು ಜನಪ್ರತಿನಿಧಿ ಕೋರ್ಟ್​​ಗೆ ನೀಡಲಾಗಿತ್ತು, ಇದೀಗ ಈ ಅವರಿಗೆ ಶಿಕ್ಷೆಯನ್ನು ಘೋಷಣೆ ಮಾಡಿದೆ.