*ವಿಶ್ವ ಕ್ಷಯರೋಗ ದಿನಾಚರಣೆ*

ಶೀಘ್ರ ಪತ್ತೆ ಮತ್ತು ಚಿಕಿತ್ಸೆಯಿಂದ ಕ್ಷಯ ರೋಗ ನಿರ್ಮೂಲನೆ ಸಾಧ್ಯ : ಡಾ.ನಟರಾಜ್

ಶಿವಮೊಗ್ಗ;
ಕ್ಷಯರೋಗವನ್ನು ಶೀಘ್ರ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಮೂಲಕ ರೋಗವನ್ನು ನಿರ್ಮೂಲನೆ ಮಾಡಬಹುದು. ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಇದರ ಉಪಯೋಗ ಪಡೆಯಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಟರಾಜ್ ಹೇಳಿದರು.
ವಿಶ್ವ ಕ್ಷಯರೋಗ ದಿನಾಚರಣೆ ಪ್ರಯುಕ್ತ ‘ಹೌದು! ನಾವು ಕ್ಷಯರೋಗವನ್ನು ಕೊನೆಗಾಣಿಸಬಹುದು’ ಎಂಬ ಘೋಷವಾಕ್ಯದೊಂದಿಗೆ ಇಂದು ಡಿಹೆಚ್‍ಓ ಕಚೇರಿಯಿಂದ ಏರ್ಪಡಿಸಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ 2023 ರಲ್ಲಿ 53713 ಶಂಕಿತರಿಗೆ ಕಫ ಪರೀಕ್ಷೆ ಮಾಡಿಸಿ 1303 ಕ್ಷಯರೋಗಿಗಳನ್ನು ಪತ್ತೆಹಚ್ಚಿ ಡಾಟ್ಸ್ ಚಿಕಿತ್ಸೆ ಪ್ರಾರಂಭಿಸಲಾಗಿರುತ್ತದೆ. 48 ಎಂಡಿಆರ್ ರೋಗಿಗಳನ್ನು ಪತ್ತೆಹಚ್ಚಿ ಚಿಕಿತ್ಸೆ ಪ್ರಾರಂಭಿಸಲಾಗಿರುತ್ತದೆ. ಚಿಕಿತ್ಸೆಗೊಳಪಡಿಸಿದ ಎಲ್ಲಾ ರೋಗಿಗಳಿಗೆ ಚಿಕಿತ್ಸಾ ಅವಧಿಯಲ್ಲಿ ರೂ.500 ನ್ನು ಪೌಷ್ಟಿಕ ಆಹಾರಕ್ಕಾಗಿ ನೀಡಲಾಗುತ್ತಿದೆ. ಅಲ್ಲದೇ ನಿಕ್ಷಯ ಮಿತ್ರ ಯೋಜನೆಯಡಿ ದಾನಿಗಳಿಂದ ಪೌಷ್ಟಿಕ ಆಹಾರದ ಕಿಟ್‍ಗಳನ್ನು ವಿತರಿಸಲಾಗುತ್ತಿದೆ.

ಎಂಡಿಆರ್ ರೋಗಿಗಳ ಶೀಘ್ರ ಪತ್ತೆಗಾಗಿ ಸಿಬಿನ್ಯಾಟ್ ಪ್ರಯೋಗಾಲಯವನ್ನು ಜಿಲ್ಲಾ ಮೆಗ್ಗಾನ್ ಆಸ್ಪತ್ರೆ, ತೀರ್ಥಹಳ್ಳಿ, ಶಿಕಾರಿಪುರ, ಸಾಗರ, ಸೊರಬ, ಹೊಸನಗರ, ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಟ್ರೂನ್ಯಾಟ್ ಪ್ರಾರಂಭಿಸಲಾಗಿದ್ದು ಇದರಿಂದ ಟಿಬಿ ಮತ್ತು ಎಂಡಿಆರ್ ರೋಗಿಗಳ ಶೀಘ್ರ ಪತ್ತೆ ಮತ್ತು ಚಿಕಿತ್ಸೆಗೆ ಅನುಕೂಲವಾಗಿದೆ.

ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಮತ್ತು ಸಮುದಾಯಗಳಲ್ಲಿ, ಕೊಳಚೆ ಪ್ರದೇಶಗಲಲ್ಲಿ, ಹೈರಿಸ್ಕ್ ಏರಿಯಾಗಳಲ್ಲಿ, ಗಣಿಗಾರಿಕೆ ಪ್ರದೇಶಗಳಲ್ಲಿ, ಕಾರ್ಖಾನೆಗಳಲ್ಲಿ, ಹೆಚ್‍ಐವಿ ಬಾಧಿತರಲ್ಲಿ ಮಧುಮೇಹಿಗಳಿರುವ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಇರುವ ಪ್ರದೇಶಗಳಲ್ಲಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮಾಹಿತಿ ಶಿಕ್ಷಣ ಮತ್ತು ಸಂಪರ್ಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ.
ಈ ವರ್ಷ ಕ್ಷಯರೋಗ ನಿರ್ಮೂಲನೆಗೆ ಜಿಲ್ಲೆಯ 60 ಗ್ರಾ.ಪಂ ಗಳು ಕ್ಷಯಮುಕ್ತ ಗ್ರಾಮ ಪಂಚಾಯ್ತಿಗೆ ಆಯ್ಕೆ ಆಗಿದ್ದು ಈ ಗ್ರಾ.ಪಂ ಗಳಲ್ಲಿ ಪಿಡಿಓ, ಎಲ್ಲಾ ಪಂಚಾಯತ್ ಸದಸ್ಯರುಗಳಿಗೆ ತರಬೇತಿ ನೀಡಿ ಕ್ಷಿಪ್ರ ಕಾರ್ಯಪಡೆ ರಚನೆ ಮಾಡಿ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿರುತ್ತದೆ.

ಅಲ್ಲದೇ ಕ್ಷಯದ ಕುರಿತು ಅರಿವು ಮೂಡಿಸಲು ಬೀದಿ ನಾಟಕಗಳು, ಶಾಲಾ ಕಾಲೇಜುಗಳಲ್ಲಿ ರಸಪ್ರಶ್ನೆ, ಪ್ರಬಂಧ ಸ್ಪರ್ಧೆ, ರೇಡಿಯೋ ಸಂದರ್ಶನಗಳನ್ನು ನಡೆಸಲಾಗುತ್ತಿದೆ.
ಕ್ಷಯರೋಗ ನಿರ್ಮೂಲನೆಗೆ ಜಿಲ್ಲೆಯು ಆಯ್ಕೆಯಾಗಿರುವುದರಿಂದ ಟಿಬಿ ಪ್ರಕರಣಳಿರುವ ಮನೆಗಳಲ್ಲಿ ಸಂಪರ್ಕದಲ್ಲಿರುವವರಿಗೆ ಐಜಿಆರ್‍ಎ ರಕ್ತ ಪರೀಕ್ಷೆ ಮುಖಾಂತರ ಟಿಬಿ ಸೋಂಕನ್ನು ಕಂಡು ಹಿಡಿಯುವ ಪರೀಕ್ಷೆಯನ್ನು ಶೀಘ್ರದಲ್ಲಿ ಸಿಮ್ಸ್ ಕಾಲೇಜಿನಲ್ಲಿ ಪ್ರಾರಂಭಿಸಲಾಗುತ್ತಿದೆ. ಈ ಪರೀಕ್ಷೆಯಿಂದ ರಕ್ತದಲ್ಲಿ ಟಿಬಿ ಬ್ಯಾಕ್ಟೀರಿಯಾ ಕಂಡುಬಂದಲ್ಲಿ ಮುಂದೆ ಟಿಬಿ ಬಾರದಂತೆ ಕಿಮೋಪ್ರೊಲ್ಯಾಕ್ಸಿಸ್ ಚಿಕಿತ್ಸೆ ನೀಡಲಾಗುತ್ತದೆ ಎಂದರು.

ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿಗಳು ಡಾ. ದಿನೇಶ್ ಮಾತನಾಡಿ, ಕ್ಷಯ ರೋಗವು ಮೈಕೋಬ್ಯಾಕ್ಟೀರಿಯಂ ಟ್ಯುಬರ್ ಕ್ಯುಲೋಸಿಸ್ ಎಂಬ ಸೂಕ್ಷ್ಮ ರೋಗಾಣುವಿನಿಂದ ಬರುತ್ತದೆ. ಭಾರತದಲ್ಲಿ ಪ್ರತಿ ದಿನ ಸುಮಾರು 6 ಸಾವಿರ ಜನರಲ್ಲಿ ಕ್ಷಯರೋಗ ಕಂಡು ಬರುತ್ತಿದ್ದು ಸುಮಾರು 600 ಜನ ಸಾವನ್ನಪ್ಪುತ್ತಿದ್ದಾರೆ.

ಸತತ ಎರಡು ವಾರ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಕೆಮ್ಮು, ಜ್ವರ, ತೂಕ ಕಡಿಮೆಯಾಗುವುದು, ರಾತ್ರಿ ವೇಳೆ ಬೆವರುವುದು, ಕಫದಲ್ಲಿ ರಕ್ತ, ಎದೆನೋವು, ಹಸಿವಾಗದಿರುವುದು ಇತರೆ ರೋಗ ಲಕ್ಷಣಗಳು ಕಂಡುಬರುತ್ತವೆ. ಕ್ಷಯರೋಗಿಗಳು ಕೆಮ್ಮುವಾಗ, ಸೀನುವಾಗ ಬಾಯಿ ಮತ್ತು ಮೂಗಿನ ಹತ್ತಿರ ಕರವಸ್ತ್ರ ಇಟ್ಟುಕೊಳ್ಳಬೇಕು. ಎಲ್ಲೆಂದರಲ್ಲಿ ಉಗಿಯಬಾರದು. ನವಜಾತ ಶಿಶುಗಳಿಗೆ ಬಿಸಿಜಿ ಲಸಿಕೆ ಹಾಕಿಸಬೇಕು. ಕ್ಷಯ ರೋಗದ ಪರೀಕ್ಷೆ ಮತ್ತು ಚಿಕಿತ್ಸೆ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ದೊರೆಯುತ್ತದೆ ಇದರ ಉಪಯೋಗ ಪಡೆದುಕೊಳ್ಳಬೇಕೆಂದರು.
ಜಾಥಾ ಡಿಹೆಚ್‍ಓ ಕಚೇರಿಯಿಂದ ಆರಂಭಗೊಂಡು ಬಿ ಹೆಚ್ ರಸ್ತೆ ಮುಖಾಂತರ ಗೋಪಿ ಸರ್ಕಲ್ ಮೂಲಕ ಹಾದು ಬಂದು ಐಎಂಎ ಸಭಾಂಗಣದಲ್ಲಿ ಮುಕ್ತಾಯಗೊಂಡಿತು.

ಐಎಂಎ ಅಧ್ಯಕ್ಷರಾದ ಡಾಕ್ಟರ್ ರಮೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಟಿಹೆಚ್‍ಓ ಡಾ.ಚಂದ್ರಶೇಖರ್, ಡಿಎಲ್‍ಓ ಡಾ.ಕಿರಣ್, ರೋಟರಿ ಮಾಜಿ ಸಹಾಯಕ ಗೌರ್ನರ್ ಜಿ ವಿಜಯಕುಮಾರ್. ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿಗಳ ಕಚೇರಿ ಸಿಬ್ಬಂದಿಗಳು, ಸುಬ್ಬಯ್ಯ ಮೆಡಿಕಲ್ ಕಾಲೇಜ್ ನಸಿರ್ಂಗ್ ಕಾಲೇಜ್ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.