ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಜೂ.3 ರಂದು ಮತದಾನ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ*

*ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಜೂ.3 ರಂದು ಮತದಾನ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ*

ಶಿವಮೊಗ್ಗ

ಕರ್ನಾಟಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಜೂನ್ 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದರು.
ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ನೈರುತ್ಯ ಪದವೀಧರ ಒಟ್ಟು 27412 ಒಟ್ಟು 38 ಮತಕೇಂದ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 4365 ಮತದಾರರು ಇದ್ದು ಒಟ್ಟು 32 ಮತಕೇಂದ್ರಗಳನ್ನು ತೆರೆಯಲಾಗಿದ್ದು ಮತದಾರರು ತಮ್ಮ ಮತ ಇರುವ ಕೇಂದ್ರದಲ್ಲಿ ಮತದಾನ ಮಾಡಬಹುದಾಗಿದೆ.
ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ 200 ಮೀ. ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧಿಸಿದಂತೆ ದಿನಾಂಕ:01-06-24 ಅಪರಾಹ್ನ 4 ಗಂಟೆಯಿಂದ 03-06-2024 ರ ಅಪರಾಹ್ನ 4 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ “ಒಣ ದಿನ” ಘೋಷಿಸಿ ಆದೇಶಿಸಲಾಗಿದೆ.
ಚುನಾವಣಾಧಿಕಾರಿ, ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರ ಹಾಗೂ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ರವರ ಪತ್ರಿಕಾ ಪ್ರಕಟಣೆ ದಿನಾಂಕ:29.05.2024 ರಂತೆ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ಸಂಘ ಸಂಸ್ಥೆಗಳು ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇನ್ನಿತರ ಎಸ್ಟಬ್ಲಿಷ್‍ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತಚಲಾಯಿಸಲಿರುವ ಮತದಾರರಿಗೆ ದಿನಾಂಕ:03.06.2024 ರ ಸೋಮವಾರದಂದು ವಿಶೇಷ ಸಾಂಧರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿರುತ್ತಾರೆ. ಮತದಾನ ಮಾಡಲು ಚುನಾವಣಾ ಆಯೋಗ ಸೂಚಿಸಿರುವ ಭಾವಚಿತ್ರ ಇರುವ ಯಾವುದೇ ಗುರುತಿನ ಚೀಟಿ ತೋರಿಸಿ ಮತದಾನ ಮಾಡಬಹುದು ಎಂದರು.
ದಿನಾಂಕ:02.06.2024 ರಂದು ಬೆಳಿಗ್ಗೆ 10.00 ಗಂಟೆಗೆ ಶಿವಮೊಗ್ಗ ನಗರ ಮಹಾನಗರ ಪಾಲಿಕೆ ಸೇರಿ ಎಲ್ಲಾ ತಾಲ್ಲೂಕು ಕಛೇರಿ ಕೇಂದ್ರಗಳಲ್ಲಿ ಮಸ್ಟರಿಂಗ್ ಕಾರ್ಯ ಪ್ರಾರಂಭಗೊಳ್ಳುತ್ತದೆ. ನಂತರ ದಿನಾಂಕ:03.06.2024 ರ ಸಂಜೆ 4.00 ಗಂಟೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡ ನಂತರ ಮತಪೆಟ್ಟಿಗೆಗಳನ್ನು ಮತ್ತು ಶಾಸನಬದ್ಧ ಲಕೋಟೆಗಳನ್ನು ಡಿಮಸ್ಟರಿಂಗ್ ಕೇಂದ್ರದಲ್ಲಿ ಕ್ರೋಢೀಕರಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಗೆ ಪೊಲೀಸ್ ಬೆಂಗಾವಲಿನಲ್ಲಿ ತರಲಾಗುವುದು.
ಮತಪೆಟ್ಟಿಗೆಗಳನ್ನು ಮತ್ತು ಶಾಸನಬದ್ಧ ಲಕೋಟೆಗಳನ್ನು ಪೊಲೀಸ್ ಬೆಂಗಾವಲಿನಲ್ಲಿ ಮೈಸೂರು ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಜೆ.ಎಲ್.ಬಿ ರಸ್ತೆ, ಮೈಸೂರು ಇಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಗೆ ಮತಗಟ್ಟೆವಾರು ಮತಪೆಟ್ಟಿಗೆಗಳನ್ನು ಇರಿಸಲು ಕ್ರಮವಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಉಪಸ್ಥಿತರಿದ್ದರು.