ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾ*; *ಸರ್ಕಾರಕ್ಕೆ ಜಯ*

*ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾ*;

*ಸರ್ಕಾರಕ್ಕೆ ಜಯ*

ಸಣ್ಣ ಪ್ರಮಾಣದಲ್ಲಿ ಸಾಲ ಪಡೆದವರಿಗೆ ಕಿರುಕುಳ ನೀಡುವುದನ್ನು ತಪ್ಪಿಸುವುದಕ್ಕಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಸುಗ್ರೀವಾಜ್ಞೆ 2025 (ಮೈಕ್ರೋ ಫೈನಾನ್ಸ್) ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಕರ್ನಾಟಕ ಹೈರ್ ಪರ್ಚೇಸ್ ಅಸೋಸಿಯೇಷನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇಂದು (ಮಾರ್ಚ್ 17) ವಜಾಗೊಳಿಸಿ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದರಿಂದ ಸಿದ್ದರಾಮಯ್ಯ ಸರ್ಕಾರ ಮೇಲುಗೈ ಸಾಧಿಸಿದೆ.

ಕರ್ನಾಟಕ ಹೈಯರ್ ಪರ್ಚೇಸಿಂಗ್ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ಆದೇಶವನ್ನು ಕಾಯ್ದಿರಿಸಿತ್ತು. ಅಲ್ಲದೇ, ಸುಗ್ರೀವಾಜ್ಞೆ ಕುರಿತಂತೆ ನ್ಯಾಯಾಲಯ ಪರಾಮರ್ಶಿಸಿ ಸ್ಪಷ್ಟೀಕರಣ ನೀಡುವ ಅಗತ್ಯವಿದೆ ಎಂದು ಪೀಠ ತಿಳಿಸಿತು. ಇದಕ್ಕೆ ರಾಜ್ಯ ಸರ್ಕಾರ, ಮೈಕ್ರೋ ಫೈನಾನ್ಸ್ ಗಳಿಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತದೆ. ವಾರ್ಷಿಕ 3 ಲಕ್ಷಕ್ಕಿಂತ ಕಡಿಮೆ ವರಮಾನದವರಿಗೆ ಭದ್ರತೆ ರಹಿತ ಸಾಲಕ್ಕೆ ಅನ್ವಯವಾಗುತ್ತದೆ ಎಂದು ಮಾಹಿತಿ ನೀಡಿತ್ತು. ಸರ್ಕಾರದ ಈ ಹೇಳಿಕೆ ಪರಿಗಣಿಸಿ ಹೈಕೋರ್ಟ್​ ರಿಟ್​ ಅರ್ಜಿಯನ್ನು ವಜಾಗೊಳಿಸಿದೆ.

ಸುಗ್ರೀವಾಜ್ಞೆ ಕೆಲವು ಸೆಕ್ಷನ್‌ಗಳು ಸಾಲದಾತರನ್ನು ತೊಂದರೆಗೆ ಸಿಲುಕಿಸಲಿದ್ದು, ಅವರ ಕಾನೂನುಬದ್ಧ ಹಕ್ಕುಗಳು ಹಾಗೂ ಆರ್ಥಿಕ ಹಿತಾಸಕ್ತಿಗಳನ್ನು ಉಲ್ಲಂಘಿಸಲಿವೆ. ಮೈಕ್ರೋ ಫೈನಾನ್ಸ್ ಎಂದರೆ ಏನು ಎಂಬುದನ್ನು ಸುಗ್ರೀವಾಜ್ಞೆಯಲ್ಲಿ ವ್ಯಾಖ್ಯಾನಿಸಿಲ್ಲ. ಆದ್ದರಿಂದ ಸುಗ್ರೀವಾಜ್ಞೆ ದುರುದ್ದೇಶಕ್ಕಾಗಿ ಬಳಸಿಕೊಳ್ಳುವುದಕ್ಕೆ ಅವಕಾಶವಿರಲಿದೆ. ಸುಗ್ರೀವಾಜ್ಞೆಯ ಸಂವಿಧಾನದ ಪರಿಚ್ಛೇದ 14, 19,21 ಮತ್ತು 300ಎ ಗಳನ್ನು ಉಲ್ಲಂಘಿಸಲಿದ್ದು, ತರಾತುರಿಯಲ್ಲಿ ಜಾರಿ ಮಾಡಲಾಗಿದೆ ಎಂದು ಕರ್ನಾಟಕ ಹೈಯರ್ ಪರ್ಚೇಸಿಂಗ್ ಅಸೋಸಿಯೇಷನ್ ಪರ ವಕೀಲರು ವಾದ ಮಂಡಿಸಿದ್ದರು.

ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಈ ಹಿಂದೆ ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ಸದನದಲ್ಲಿ ಮಂಡಿಸಲಾಗಿದ್ದು, ವಿಧಾನ ಸಭೆಯಲ್ಲಿ ಅಂಗೀಕರಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದ್ದರು. ಜತೆಗೆ, ಮೈಕ್ರೋ ಫೈನಾನ್ಸ್‌ಗಳ ವ್ಯಾಖ್ಯಾನ ಕುರಿತಂತೆ ಆರ್‌ಬಿಐ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರಂತೆ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಕಳೆದ ಕೆಲವು ದಿನಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ 17 ಮಂದಿ ಸಾವನ್ನಪ್ಪಿದ್ದಾರೆ. ಬಡ ವರ್ಗಗಳು ಮತ್ತು ದುರ್ಬಲ ವರ್ಗಗಳ ರಕ್ಷಣೆ ಮಾಡುವುದಕ್ಕಾಗಿ ಸುಗ್ರೀವಾಜ್ಞೆ ಜಾರಿ ಮಾಡಲಾಗಿದೆ ಎಂದು ವಿವರಿಸಿದ್ದರು.

ಅಲ್ಲದೆ, ಮೂರು ಲಕ್ಷಕ್ಕಿಂತ ಕಡಿಮೆ ವರಮಾನವಿರುವವರಿಗೆ ಶ್ಯೂರಿಟಿ ಪಡೆಯದೆ ಸಾಲ ನೀಡುವ ಮೈಕ್ರೋ ಫೈನಾನ್ಸ್‌ಗೆ ಮಾತ್ರ ಇದು ಅನ್ವಯವಾಗಲಿದೆ. ಸಾಲ ಪಡೆದವರಿಗೆ ಕಿರುಕುಳ ನೀಡಬಾರದು ಎಂಬ ಕಾರಣದಿಂದ ಸುಗ್ರೀವಾಜ್ಞೆ ಜಾರಿ ಮಾಡಲಾಗಿದೆ ಎಂದು ವಾದ ಮಂಡನೆ ಮಾಡಿದ್ದರು.