ಓಂ ಪ್ರಕಾಶ್ ಕೊಲೆ ಪ್ರಕರಣ:* *ಹತ್ಯೆ ರಹಸ್ಯ ಬಿಚ್ಚಿಟ್ಟ ಮಾಜಿ ಡಿಜಿ ಪತ್ನಿ ಪಲ್ಲವಿ* *ಖಾರದಪುಡಿ ಎರಚಿ, ಕೈ-ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿ ಕೊಲೆ* *ಮಗನೇ ದೂರುದಾರ- ಹೆಂಡತಿ, ಮಗಳೇ ಕೊಲೆಗಾರರು!*
*ಓಂ ಪ್ರಕಾಶ್ ಕೊಲೆ ಪ್ರಕರಣ:*
*ಹತ್ಯೆ ರಹಸ್ಯ ಬಿಚ್ಚಿಟ್ಟ ಮಾಜಿ ಡಿಜಿ ಪತ್ನಿ ಪಲ್ಲವಿ*
*ಖಾರದಪುಡಿ ಎರಚಿ, ಕೈ-ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿ ಕೊಲೆ*
*ಮಗನೇ ದೂರುದಾರ- ಹೆಂಡತಿ, ಮಗಳೇ ಕೊಲೆಗಾರರು!*
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) ಹತ್ಯೆ ಪ್ರಕರಣ ಸಂಬಂದ ಅವರ ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದುಕೊಂಡಿರುವ ಬೆಂಗಳೂರು (Bengaluru) ಪೊಲೀಸರಿಗೆ ಒಂದೊಂದೇ ಭಯಾನಕ ವಿಚಾರಗಳು ತಿಳಿದುಬರುತ್ತಿವೆ.
ಘಟನೆ ಸಂಬಂಧ ತನಿಖಾಧಿಕಾರಿಗಳ ಎದುರು ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರು ಹೇಳಿಕೆ ನೀಡಿದ್ದು, ಅನೇಕ ಸ್ಫೋಟಕ ಅಂಶಗಳನ್ನು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಓಂ ಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಪೊಲೀಸರ ವಶದಲ್ಲಿದ್ದಾರೆ. ಇಂದು ಓ ಪ್ರಕಾಶ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದೆ.
*ಓಂ ಪ್ರಕಾಶ್ ಪತ್ನಿ ಪಲ್ಲವಿ ಹೇಳಿದ್ದೇನು?*
ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಪದೇಪದೆ ಗನ್ ತಂದು ನನಗೆ, ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು. ಶೂಟ್ ಮಾಡುವುದಾಗಿ ಹೆದರಿಸುತ್ತಿದ್ದರು. ಬೆಳಗ್ಗೆಯಿಂದ ಬೇರೆಬೇರೆ ವಿಚಾರಕ್ಕೆ ಮನೆಯಲ್ಲಿ ಜಗಳವಾಗಿದೆ. ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋಗಿ ನಮ್ಮನ್ನೇ ಕೊಲೆ ಮಾಡಲು ಓಂಪ್ರಕಾಶ್ ಯತ್ನಿಸಿದ್ದರು. ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಟ ಮಾಡಿದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
*ಖಾರದಪುಡಿ ಎರಚಿ, ಕೈ-ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದೆವು: ಪಲ್ಲವಿ ಹೇಳಿಕೆ*
ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಡಿದೆವು. ಬಳಿಕ ಖಾರದಪುಡಿ ಹಾಗೂ ಅಡುಗೆ ಎಣ್ಣೆ ಹಾಕಿದೆವು. ಕೈಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದ್ದೆವು ಎಂದು ಓಂ ಪ್ರಕಾಶ್ ಪತ್ನಿ ಪಲ್ಲವಿ ತನಿಖಾಧಿಕಾರಿಗಳ ಬಳಿ ಹೇಳಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದ ಓಂ ಪ್ರಕಾಶ್ ಸಾವಿಗೀಡಾಗಿದ್ದಾರೆ. ಘಟನೆ ನಂತರ ಸಂಜೆ ಸ್ಥಳೀಯ ಪೊಲೀಸರಿಗೆ ಪಲ್ಲವಿ ಮಾಹಿತಿ ನೀಡಿದ್ದರು.
ಇದೀಗ ಪ್ರಕರಣದಲ್ಲಿ ಪಲ್ಲವಿ ಮೊದಲ ಆರೋಪಿಯಾಗಲಿದ್ದಾರೆ. ಹತ್ಯೆಯಲ್ಲಿ ಮಗಳ ಪಾತ್ರದ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಇಬ್ಬರೂ ಪೊಲೀಸ್ ವಶದಲ್ಲಿದ್ದಾರೆ.
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರ ಹತ್ಯೆ ಪ್ರಕರಣ ಸದ್ಯ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಘಟನೆ ಕುರಿತು ಓಂ ಪ್ರಕಾಶ್ ಪುತ್ರ ದೂರು ನೀಡಿದ್ದಾರೆ. ಸದ್ಯಕ್ಕೆ ಯಾರನ್ನೂ ಬಂಧಿಸಿಲ್ಲ. ಆದರೆ, ಅವರ ಪತ್ನಿ, ಮಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಭಾನುವಾರ ರಾತ್ರಿ ತಿಳಿಸಿದ್ದಾರೆ.