ಭಾರತ, ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ;* *ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ*
*ಭಾರತ, ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ;*
*ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ*
ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿದ್ದ ವೈಮಾನಿಕ ದಾಳಿಯ (Airstrike) ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವೆ ಶಾಂತಿ ಮಾತುಕತೆಗೆ ಕೆಲವು ದೇಶಗಳು ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದವು. ಅದರಲ್ಲಿ ಅಮೆರಿಕ (United States) ಕೂಡ ಒಂದು. ಭಾರತದ ಜೊತೆ ಉತ್ತಮ ಸಂಬಂಧ ಹೊಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿ ಭಾರತ ತಮ್ಮ ಮೇಲೆ ದಾಳಿ ನಡೆಸುವುದನ್ನು ತಡೆಯಬೇಕೆಂದು ಪಾಕಿಸ್ತಾನದ ಪ್ರಧಾನಿ ಮನವಿ ಮಾಡಿದ್ದರು ಎಂಬ ಸುದ್ದಿಗಳು ಹರಿದಾಡಿದ್ದವು. ಇಂದು ಈ ಬಗ್ಗೆ ಘೋಷಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ’ ಎಂದು ಹೇಳಿದ್ದಾರೆ. ಅಮೆರಿಕದ ಮಧ್ಯಸ್ಥಿಕೆ ಮಾತುಕತೆಗಳಿಂದಾಗಿ ಎರಡೂ ದೇಶಗಳು ದಾಳಿಯನ್ನು ನಿಲ್ಲಿಸಲು ಒಪ್ಪಿವೆ ಎನ್ನಲಾಗಿದೆ.
ಮಹತ್ವದ ರಾಜತಾಂತ್ರಿಕ ಬೆಳವಣಿಗೆಯೊಂದರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದು, ಭಾರತ ಮತ್ತು ಪಾಕಿಸ್ತಾನದ ನಡುವಿನ ಬಿಕ್ಕಟ್ಟನ್ನು ಬಗೆಹರಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸಿದೆ. ದೀರ್ಘ ರಾತ್ರಿಯ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದಿದ್ದಾರೆ. ಡೊನಾಲ್ಡ್ ಟ್ರಂಪ್ ಭಾರತ-ಪಾಕಿಸ್ತಾನ ಎರಡೂ ರಾಷ್ಟ್ರಗಳು “ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆ” ತೋರಿಸಿದ್ದಕ್ಕಾಗಿ ಶ್ಲಾಘಿಸಿದ್ದಾರೆ. ದಿನಗಟ್ಟಲೆ ಉಲ್ಬಣಗೊಳ್ಳುತ್ತಿದ್ದ ಮಿಲಿಟರಿ ಸಂಘರ್ಷದ ನಂತರ ಯುದ್ಧವನ್ನು ನಿಲ್ಲಿಸಿ ಶಾಂತತೆಯನ್ನು ಪುನಃಸ್ಥಾಪಿಸುವ ಎರಡೂ ದೇಶಗಳ ನಿರ್ಧಾರವನ್ನು ಅವರು ಶ್ಲಾಘಿಸಿದರು.
ಕಳೆದ ಮೂರು ದಿನಗಳಿಂದ ಗುಂಡಿನ ಚಕಮಕಿ ನಡೆಸುತ್ತಿರುವ ಯುದ್ಧ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿವೆ ಎಂದು ಅಮೆರಿಕ ಹೇಳಿದೆ. ಈ ಹಿಂದೆ ಭಾರತ ಮತ್ತು ಪಾಕಿಸ್ತಾನದ ಯುದ್ಧದ ಸಾಧ್ಯತೆ ಬಗ್ಗೆ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅದು ನಮಗೆ ಸಂಬಂಧವಿಲ್ಲದ ವಿಷಯ, ಆ ಯುದ್ಧದಲ್ಲಿ ಅಮೆರಿಕ ಭಾಗಿಯಾಗುವುದಿಲ್ಲ ಎಂದು ಹೇಳಿದ್ದರು. ಇದೀಗ ಅವರು ಕೂಡ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.
ಈ ಬಗ್ಗೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಕೂಡ ಟ್ವೀಟ್ ಮಾಡಿದ್ದು, “ಕಳೆದ 48 ಗಂಟೆಗಳಲ್ಲಿ ಅಮೆರಿಕದ ಉಪಾಧ್ಯಕ್ಷ ವ್ಯಾನ್ಸ್ ಮತ್ತು ನಾನು ಭಾರತದ ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಭಾರತದ ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್, ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಮತ್ತು ಅಸಿಮ್ ಮಲಿಕ್ ಸೇರಿದಂತೆ ಹಿರಿಯ ಭಾರತೀಯ ಮತ್ತು ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಮತ್ತು ತಟಸ್ಥ ಸ್ಥಳದಲ್ಲಿ ವ್ಯಾಪಕವಾದ ವಿಷಯಗಳ ಕುರಿತು ಮಾತುಕತೆಗಳನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಶಾಂತಿಯ ಮಾರ್ಗವನ್ನು ಆಯ್ಕೆ ಮಾಡುವಲ್ಲಿ ಪ್ರಧಾನಿ ಮೋದಿ ಮತ್ತು ಷರೀಫ್ ಅವರ ಬುದ್ಧಿವಂತಿಕೆ, ವಿವೇಕ ಮತ್ತು ರಾಜತಾಂತ್ರಿಕತೆಯನ್ನು ನಾವು ಶ್ಲಾಘಿಸುತ್ತೇವೆ” ಎಂದು ಹೇಳಿದ್ದಾರೆ.