ನಿಮ್ಮ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ?’;* *ಕಮಲ್ ಹಾಸನ್​ಗೆ ಕೋರ್ಟ್ ತರಾಟೆ*

*ನಿಮ್ಮ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ?’;*

*ಕಮಲ್ ಹಾಸನ್​ಗೆ ಕೋರ್ಟ್ ತರಾಟೆ*

ಕಮಲ್ ಹಾಸನ್ ಅವರ ನಟನೆಯ ‘ಥಗ್ ಲೈಫ್’ (Thug Life Movie) ಸಿನಿಮಾಗೆ ಕರ್ನಾಟಕದಲ್ಲಿ ಬಿಡುಗಡೆ ಆಗಲು ಅಡಚಣೆ ಉಂಟಾಗಿದೆ. ಕನ್ನಡದ ಬಗ್ಗೆ ತಪ್ಪು ಹೇಳಿಕೆ ನೀಡಿ ಆ ಬಳಿಕ ಕ್ಷಮೆ ಕೇಳುವುದಿಲ್ಲ ಎಂದು ಕಮಲ್ ಹಾಸನ್ ವಾದ ಮಾಡಿದ್ದೇ ಇದಕ್ಕೆ ಕಾರಣ. ಈ ಮಧ್ಯೆ ‘ಥಗ್ ಲೈಫ್ ‘ ರಿಲೀಸ್​ಗೆ ಭದ್ರತೆ ಕೋರಿ ಕಮಲ್ ಹಾಸನ್ ಅವರು ಕರ್ನಾಟಕ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಅರ್ಜಿಯ ವಿಚಾರಣೆ ಇಂದು (ಜೂನ್ 3) ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ನಡೆದಿದೆ. ಈ ವೇಳೆ ಕಮಲ್ ಹಾಸನ್​ಗೆ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮಧ್ಯಾಹ್ಹ 2.30ರವರೆಗೆ ಕಮಲ್ ಹಾಸನ್ ವಕೀಲರಿಗೆ ಗಡುವು ನೀಡಿದ್ದು, ನಿಲುವು ತಿಳಿಸುವಂತೆ ಕೋರ್ಟ್ ಸೂಚಿಸಿದೆ.

ಸಿ. ರಾಜಗೋಪಾಲಚಾರಿ ಇದೇ ರೀತಿಯ ಹೇಳಿಕೆ ನೀಡಿದ್ದರು. ನಂತರ ಅವರು ಕ್ಷಮೆಯಾಚನೆ ಮಾಡಿದ್ದರು. ಆದರೆ ಕಮಲಹಾಸನ್ ಯಾವುದೇ ಕ್ಷಮೆಯಾಚನೆ ಮಾಡಿಲ್ಲ. ಅವರು ಸಿನಿಮಾ ಮಾಡಿರೋದು ವಾಣಿಜ್ಯ ಉದ್ದೇಶದಿಂದ. ಈಗ ತಪ್ಪು ಮಾಡಿದ್ದಾರೆ. ಅವರು ಮಾಡಿದ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ’ ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಕಮಲ್ ಅವರ ವಕೀಲ ಧ್ಯಾನ್ ಚಿನ್ನಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿತು.

ನಿಮ್ಮ ಹೇಳಿಕೆಯಿಂದ ಶಿವರಾಜಕುಮಾರ್ ಸಮಸ್ಯೆ ಅನುಭವಿಸುವಂತಾಗಿದೆ. ನೀವು ನಿಮ್ಮ ಹೇಳಿಕೆಯನ್ನು ನಿರಾಕರಿಸಿಲ್ಲ, ಒಪ್ಪಿಕೊಂಡಿದ್ದೀರಾ. ಆದರೆ ಕ್ಷಮೆಯಾಚನೆ ಮಾಡಲು ಸಿದ್ಧರಿಲ್ಲ. ಬೇರೆಯವರ ಭಾವನೆಗಳಿಗೆ ಧಕ್ಕೆ ತಂದು ಸಿನಿಮಾ ಬಿಡುಗಡೆ ಬಯಸುತ್ತಿದ್ದೀರಾ? 300 ಕೋಟಿ ರೂಪಾಯಿಯ ಸಿನಿಮಾ ಎನ್ನುತ್ತಿದ್ದೀರಾ, ಕ್ಷಮೆಯಾಚನೆ ಮಾಡಿ. ಆಗ ಸಮಸ್ಯೆಯೇ ಇರುವುದಿಲ್ಲ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಯಾರೊಬ್ಬರ ಭಾವನೆಯ ಮೇಲೆ ಸವಾರಿ ಮಾಡಬಾರದು. ಆದೇಶ ಹೊರಡಿಸಲು ನಮಗೆ ಸಮಸ್ಯೆ ಇಲ್ಲ. ಕ್ಷಮೆ ಕೇಳಲಾಗದಿದ್ದರೆ ಬಿಡಿ. ಕರ್ನಾಟಕದಲ್ಲಿ ಬಿಡುಗಡೆ ಏಕೆ ಬೇಕು’ ಎಂದು ಕಮಲ್ ಹಾಸನ್ ವಕೀಲರಿಗೆ ನಾಗಪ್ರಸನ್ನ ಪ್ರಶ್ನೆ ಮಾಡಿದ್ದಾರೆ.